ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹತ್ವಾಕಾಂಕ್ಷಿ ಮತ್ತು ಇಡೀ ರಾಜ್ಯಕ್ಕೆ ಮಾದರಿಯಾದ 'ಗ್ರಾಮ ವಾಸ್ತವ್ಯ' ಯೋಜನೆಯ ಸಮಗ್ರ ಚಿತ್ರಣ ಮತ್ತು ಮಾಹಿತಿಯನ್ನು ಒಳಗೊಂಡ ವಿಶೇಷ ಕೈಪಿಡಿಯನ್ನು ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ವಿಧಾನಸೌಧದ ಗೃಹ ಕಚೇರಿಯಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಿದರು.
ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ಪತ್ರಕರ್ತರು ಕೇವಲ ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತು ವರದಿ ಮಾಡದೆ, ಗ್ರಾಮೀಣ ಭಾಗದ ಕಟ್ಟಕಡೆಯ ಹಳ್ಳಿಗಳಿಗೆ ತೆರಳಿ ವಾಸ್ತವ್ಯ ಹೂಡಿ, ಅಲ್ಲಿನ ಮೂಲಭೂತ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರ ಸಾಮಾಜಿಕ ಬದ್ಧತೆ ಮತ್ತು ವಿಶಿಷ್ಟ ಶ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಸಂಘದ ಹಿರಿಯ ಪದಾಧಿಕಾರಿಗಳು ಹಾಗೂ ಕೆಯುಡಬ್ಲ್ಯೂಜೆ ರಾಜ್ಯ ಸಮಿತಿ ಸದಸ್ಯರಾದ ಶ್ರೀನಿವಾಸ ನಾಯಕ್ ಇಂದಾಜೆ ಅವರು ಉಪಸ್ಥಿತರಿದ್ದು, ಮುಖ್ಯಮಂತ್ರಿಗಳಿಗೆ ಕರಾವಳಿ ಪತ್ರಿಕಾರಂಗದ ಗ್ರಾಮ ವಾಸ್ತವ್ಯದ ಯಶಸ್ಸಿನ ಸಾರಾಂಶವನ್ನು ಮನವರಿಕೆ ಮಾಡಿಕೊಟ್ಟರು.